Showing posts with label Wisdom. Show all posts
Showing posts with label Wisdom. Show all posts

Saturday, May 9, 2026

ಕಗ್ಗಮಾಲಿಕೆ - ೬: ಧರ್ಮಜಿಜ್ಞಾಸೆ

 

ಕಗ್ಗಮಾಲಿಕೆ - ೬: ಧರ್ಮಜಿಜ್ಞಾಸೆ

ಪೀಠಿಕೆ:

ಕಾಣದ ವಸ್ತುಗಳೆಡೆಗಿನ ಭಯವೇ ಮನುಷ್ಯನಲ್ಲಿ ಭಕ್ತಿಯನ್ನುಂಟುಮಾಡುತ್ತದೆಯೇ ಎಂಬುದು ಮೂಲ ಜಿಜ್ಞಾಸೆ. ಅದು ಬರಿಯ ಭಯವಾಗಿದ್ದರೆ ಆ ದೇವತೆಗಳ ಪರಾಕ್ರಮಕ್ಕೆ ಸದಾ ಕಾಲ ಹೆದರುತ್ತಿರಬೇಕು. ಇದು ಜ್ಞಾನದ ದಾರಿಯಲ್ಲ. ಅದು ಬರಿಯ ಭಯವಾಗಿದ್ದರೆ ಅಲ್ಲಿ ಮನುಷ್ಯರ ಮತ್ತು ದೇವತೆಗಳ ನಡುವೆ ಪರಸ್ಪರ ಸ್ಪರ್ಧೆ ಏರ್ಪಟ್ಟು ಅಶಾಂತಿ ನೆಲೆಸೀತು. ಅಲ್ಲಿ ಧರ್ಮಕ್ಕೆ ಸ್ಥಾನವಿಲ್ಲ. ಇದು ಅಪೇಕ್ಷಣೀಯವಲ್ಲದ ಕಾರಣ ಧರ್ಮದ ನೆಲೆಯನ್ನು ಚಿಂತಿಸಿ ಕಂಡುಕೊಳ್ಳಬೇಕಾಗುತ್ತದೆ.

ಕಗ್ಗ:

ನರರ ಭಯಬಯಕೆಗಳೆ ಸುರರ ತಾಯ್ತಂದೆಗಳೊ?|
ಸುರರಟ್ಟಹಾಸದಿನೆ ನರಭಕ್ತಿಯೊರಲೋ?||
ಪರಕಿಸುವರೇನವರ್ಗಳನ್ಯೋನ್ಯ ಶಕ್ತಿಗಳ|
ಧರುಮವೆಲ್ಲಿದರಲ್ಲಿ? ಮಂಕುತಿಮ್ಮ||



ವ್ಯಾಖ್ಯಾನ:

ದೇವತೆಗಳು ಮನುಷ್ಯರ ಕಲ್ಪನೆಯೋ  ಅಥವಾ ಆ ದೇವತೆಗಳ ಬಲವೇ ನಮ್ಮ ಭಕ್ತಿಗೆ ಮೂಲವಾಯಿತೋ ಎಂಬ ಗೊಂದಲ ಸಾಮಾನ್ಯ ಮನುಷ್ಯನದ್ದು. ಮನುಷ್ಯರು ಮತ್ತು ದೇವತೆಗಳ ಪರಸ್ಪರ ಪರೀಕ್ಷಿಸುತ್ತಿದ್ದಾರೆ ಎಂದು ತಪ್ಪಾಗಿ ತಿಳಿದುಕೊಂಡರೆ ಧರ್ಮದ ನೆಲೆ ಎಲ್ಲಿದೆಯೆಂದು ತಿಳಿಯುವುದು ಸಾಧ್ಯವಾಗದು.


ತಾತ್ಪರ್ಯ:

ಇದು ನಾಸ್ತಿಕತೆಯಲ್ಲ;  ಕಣ್ಣುಮುಚ್ಚಿ ಬೇಡಿಕೊಳ್ಳುವ ಭಕ್ತಿಯ ಪರಾಕಾಷ್ಠೆಯೂ ಇದಲ್ಲ. ಜಿಜ್ಞಾಸೆಯಿಂದ ತೊಡಗಿ ಅಂತಿಮ ಸತ್ಯದ ಆರಯ್ವಿಕೆಯತ್ತ ಒಯ್ಯುವ ಚಿಂತನೆಯ ಸೆಲೆಯಿದು. 

ಉಪಸಂಹಾರ:

ಸಗ್ಗ ಸುಖಕ್ಕೆ ದಾರಿ ತಿಳಿದವರಿಲ್ಲ. ಆದರೆ ಇದು ಕಗ್ಗ ಸುಖದ ಸೆಲೆ; ಇಲ್ಲಿ ಕಗ್ಗದ ಸಾರ ಸೋರದಂತಹ ರಾಗಬದ್ಧವಾದ ಅನುರಣನಗಳಿವೆ — ಇದನ್ನು ಯಥೇಚ್ಛವಾಗಿ ಆಸ್ವಾದಿಸಬಹುದು. ನಿಧಾನಗತಿಯ ರಾಗಾನುರಣನಗಳಲ್ಲಿ ಕಗ್ಗ ಸುಖ ದೊರಕುವಂತಾಗಲಿ. ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧವಾದ ಈ ಆಡಿಯೋ ವಿಡಿಯೋ ನಿಮ್ಮ ಮೈಮನಗಳನ್ನು ಸೂರೆಗೊಳ್ಳಬಲ್ಲುದೆಂಬ ನಿರೀಕ್ಷೆಯೊಂದಿಗೆ ಇಲ್ಲಿರುವಾತ.

#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻

Tuesday, April 28, 2026

ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ

 ಕಗ್ಗಮಾಲಿಕೆ – ೫ ಸಂಕ್ರಮಣದ ಪ್ರೇತಾವಸ್ಥೆ


ಪೀಠಿಕೆ:

ಜಗತ್ತು ಸ್ಥಿರವಾದುದಲ್ಲ, ಅದು ನಿರಂತರ ಬದಲಾವಣೆಗೆ ಒಳಪಟ್ಟಿದೆ. ಆದರೆ ಈ ಬದಲಾವಣೆಯ ಹಂತದಲ್ಲಿ ಹಳೆಯ ಮೌಲ್ಯಗಳು ಸವೆದುಹೋದಾಗ ಮತ್ತು ಹೊಸ ಮೌಲ್ಯಗಳು ಇನ್ನೂ ರೂಪಗೊಳ್ಳದಿದ್ದಾಗ ಸಮಾಜವು ಒಂದು ರೀತಿಯ ಅಸ್ಥಿರತೆಗೆ ಒಳಗಾಗುತ್ತದೆ. ಡಿ.ವಿ.ಜಿ ಅವರು ಈ ಸ್ಥಿತಿಯನ್ನು 'ಪ್ರೇತ'ದ ರೂಪಕದ ಮೂಲಕ ಈ ಪದ್ಯದಲ್ಲಿ ಚಿತ್ರಿಸಿದ್ದಾರೆ.


ಕಗ್ಗ:

ಇಳೆಯ ಬಿಟ್ಟಿನ್ನುಮೆತ್ತಲುಮೈದದ ಪ್ರೇತ|
ವಲೆವಂತೆ ಲೋಕ ತಲ್ಲಣಿಸುತಿಹುದಿಂದು||
ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ|
ತಳಮಳಕೆ ಕಡೆಯೆಂದೊ?-ಮಂಕುತಿಮ್ಮ||



ವ್ಯಾಖ್ಯಾನ:

ಪ್ರೇತಾವಸ್ಥೆಯೆಂದರೆ ಮರಣದ ನಂತರ ಪ್ರಯಾಣದಲ್ಲಿರುವ ಆತ್ಮದ ಸ್ಥಿತಿ. ಈ ಭೂಮಿಯನ್ನು ಬಿಟ್ಟು ಎಲ್ಲಿಗೂ ಹೋಗದ ಪ್ರೇತದಂತೆ ಲೋಕ ತಲ್ಲಣಿಸುತ್ತಲಿದೆ. ಹಳೆಯ ಧರ್ಮ ಸತ್ತುಹೋಗಿದೆ; ಹೊಸದಾದ ಧರ್ಮವಿನ್ನೂ ಹುಟ್ಟಲಿಲ್ಲ. ಈ ತಳಮಳಕ್ಕೆ ಕೊನೆಯೆಂದು ಎಂಬುದು ತಿಳಿಯದಾಗಿದೆ ಎಂದಿದ್ದಾರೆ.


ದೇಹವನ್ನು ಬಿಟ್ಟ ಆತ್ಮಕ್ಕೆ ಪರಲೋಕದ ದಾರಿ ಸಿಗದಿದ್ದಾಗ ಅದು ಹೇಗೆ ಭೂಮಿಯ ಮೇಲೆಯೇ ಅಲೆಯುತ್ತದೆಯೋ, ಹಾಗೆಯೇ ಇಂದಿನ ಲೋಕವು ದಿಕ್ಕು ಕಾಣದೆ ತಲ್ಲಣಿಸುತ್ತಿದೆ. ನಾವು ಹಳೆಯ ಸಂಪ್ರದಾಯಗಳನ್ನು 'ಮೌಢ್ಯ'ವೆಂದು ಬಿಡುತ್ತಿದ್ದೇವೆ, ಆದರೆ ಆಧುನಿಕತೆಯ ಹೆಸರಿನಲ್ಲಿ ನಮಗೆ ಸಿಗುತ್ತಿರುವ ಭೌತಿಕ ಸುಖಗಳು ಅಂತರಂಗದ ಶಾಂತಿಯನ್ನು ನೀಡುತ್ತಿಲ್ಲ.


"ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ" ಎಂಬ ಸಾಲು ಅತ್ಯಂತ ಪ್ರಸ್ತುತ. ವಿಜ್ಞಾನವು ಹಳೆಯ ನಂಬಿಕೆಗಳನ್ನು ಪ್ರಶ್ನಿಸಿ ಸಾಯಿಸಿದೆ. ಆದರೆ ವಿಜ್ಞಾನ ಅಥವಾ ತರ್ಕವು ಮನುಷ್ಯನಿಗೆ ಬದುಕಿನ ಉದ್ದೇಶವನ್ನಾಗಲೀ ಅಥವಾ ನೈತಿಕ ಸ್ಥೈರ್ಯವನ್ನಾಗಲೀ ಇನ್ನೂ ನೀಡಲು ಸಾಧ್ಯವಾಗಿಲ್ಲ. ಈ ಎರಡರ ನಡುವಿನ 'ಶೂನ್ಯ'ವೇ ಇಂದಿನ ಲೋಕದ ತಳಮಳಕ್ಕೆ ಕಾರಣ.


ಇದು ಕೇವಲ ಧಾರ್ಮಿಕ ಬದುಕಿನ ಕುರಿತ ಮೌಖಿಕ ಉಪದೇಶವಲ್ಲ; ಬದುಕುವುದನ್ನು ಕ್ರಮಗೊಳಿಸಬೇಕಾದ ವಿಧಾನವೂ ಇಲ್ಲಿ ಪರಾಮರ್ಶಿಸಲ್ಪಟ್ಟಿದೆ. ಹಳೆಯ ತಲೆಮಾರಿನ ಸಂಯಮ ಮತ್ತು ಹೊಸ ತಲೆಮಾರಿನ ಆವೇಗಗಳೆರಡರ ನಡುವಣ ಸೆಣಸಾಟದಲ್ಲಿ ಸಿಲುಕಿದ ಸಮಾಜದ 'ಪ್ರೇತಾವಸ್ಥೆ'ಯನ್ನು ಡಿ.ವಿ.ಜಿ ಇಲ್ಲಿ ಪ್ರಶ್ನಿಸುತ್ತಿದ್ದಾರೆ.


ತಾತ್ಪರ್ಯ:

ಈ ಅತಂತ್ರ ಸ್ಥಿತಿ ಅಥವಾ ತಳಮಳಕ್ಕೆ ಕೊನೆಯೆಂದು? ಎಂಬ ಕವಿಯ ಪ್ರಶ್ನೆಯು ನಮ್ಮನ್ನು ಆತ್ಮಾವಲೋಕನಕ್ಕೆ ಹಚ್ಚುತ್ತದೆ. ನಾವು ಯಾವುದನ್ನು 'ಧರ್ಮ'ವೆಂದು ಸ್ವೀಕರಿಸಬೇಕು ಮತ್ತು ಈ ಗೊಂದಲದಿಂದ ಹೊರಬರುವುದು ಹೇಗೆ ಎಂಬುದು ಈ ಪದ್ಯದ ಅಂತರಾರ್ಥ.


ಉಪಸಂಹಾರ:

ಸಗ್ಗ ಸುಖಕ್ಕಾಗಿ ಹಾತೊರೆಯುವುದು ಜೀವನ ಎಂಬ ಭ್ರಮೆ ಲೋಕದಲ್ಲಿದೆ. ಆದರೆ ಇಲ್ಲಿರುವುದು ಕಗ್ಗ ಸುಖದ ರಸಾಸ್ವಾದನೆಗೊಂದು ಅಪರೂಪದ ಅವಕಾಶ. ನಿಧಾನಗತಿಯ ರಾಗಾನುರಣನಗಳಲ್ಲಿ ಕಗ್ಗ ಸುಖ ದೊರಕುವಂತಾಗಲಿ. ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧವಾದ ಈ ಆಡಿಯೋ ವಿಡಿಯೋ ನಿಮ್ಮ ಮೈಮನಗಳನ್ನು ಸೂರೆಗೊಳ್ಳಬಲ್ಲುದೆಂಬ ನಿರೀಕ್ಷೆಯೊಂದಿಗೆ ಇಲ್ಲಿರುವಾತ.



#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻




ಕೃಷ್ಣಪ್ರಕಾಶ ಬೊಳುಂಬು

Saturday, April 25, 2026

ಕಗ್ಗಮಾಲಿಕೆ – ೪: ನಿರ್ವಚನಾತೀತ

 ಕಗ್ಗಮಾಲಿಕೆ – ೪: ನಿರ್ವಚನಾತೀತ


ಕಗ್ಗ:


ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ|

ಮಹಿಮೆಯಿಂ ಜಗವಾಗಿ ಜೀವವೇಷದಲಿ||

ವಿಹಿಪುದದೊಳ್ಳಿತೆಂಬುದು ನಿಸದವಾದೊಡಾ|

ಗಹನ ತತ್ತ್ವಕ್ಕೆ ಶರಣೊ-ಮಂಕುತಿಮ್ಮ|| 


ವ್ಯಾಖ್ಯಾನ:

ಇದೆಯೋ ಇಲ್ಲವೋ ಎಂದು ತಿಳಿಯಲಾಗದ ವಸ್ತುವೊಂದು ಲೋಕದಲ್ಲಿ ಒಳ್ಳೆಯದನ್ನು ಮಾಡುತ್ತದೆಂದು ನಿನಗೆ ನಿಶ್ಚಯವಾದರೆ ಆ ಗಹನ ತತ್ತ್ವಕ್ಕೆ ಶರಣಾಗು.


ತಾತ್ಪರ್ಯ:

ಎಲ್ಲವನ್ನೂ ಒಳಗೊಂಡ ಎಲ್ಲದರ ಹಿಡಿವಡೆದ ಎಲ್ಲದಕ್ಕೂ ಮಿಗಿಲಾದ ಚೈತನ್ಯವೊಂದಿದೆ. ಅದು ಗಹನವಾದ ತತ್ತ್ವ; ಅದು ವಿವರಣೆಗೆ ನಿಲುಕದಂತಹುದು. ಅದು ನಿನಗೆ ಒಳಿತನ್ನು ಮಾಡುವುದೆಂದು ನಿಶ್ಚಯವಾದರೆ ಚಿಂತನೆಗೆ ನಿಲುಕದ ಆ ಪರಮತ್ತ್ವಕ್ಕೆ ಶರಣಾಗು. ಇದು ಈ ಕಗ್ಗದ ತಾತ್ಪರ್ಯ.


ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ. ನಿಧಾನಗತಿಯ ರಾಗಾನುರಣನಗಳಲ್ಲಿ ಕಗ್ಗದ ಭಾವ ಗ್ರಾಹ್ಯವಾಗಬಲ್ಲುದು. ಅನುರಣನಗಳಲ್ಲಿ ಕಗ್ಗದ ಕಂಪು ಮೈದೋರುವಂತಾಗಲಿ.


#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻




ಕೃಷ್ಣಪ್ರಕಾಶ ಬೊಳುಂಬು

Thursday, April 16, 2026

ಕಗ್ಗಮಾಲಿಕೆ – ೩: ಅವ್ಯಕ್ತ

 

ಕಗ್ಗಮಾಲಿಕೆ – ೩: ಅವ್ಯಕ್ತ 



ಕಗ್ಗ:

ಜೀವ ಜಡರೂಪ ಪ್ರಪಂಚವನದಾವುದೋ| 

ಆವರಿಸಿಕೊಂಡುಮೊಳನೆರೆದುಮಿಹುದಂತೆ|| 

ಭಾವಕೊಳಪಡದಂತೆ ಅಳತೆಗಳವಡದಂತೆ| 

ಆ ವಿಶೇಷಕೆ ಮಣಿಯೊ-ಮಂಕುತಿಮ್ಮ||


ಪದವಿಂಗಡಣೆ:

ಪ್ರಪಂಚವಂ ಅದಾವುದೋ

ಆವರಿಸಿಕೊಂಡುಂ ಒಳನೆರೆದುಂ ಇದೆಯಂತೆ =  ಆವರಿಸಿಕೊಂಡು ಅದರೊಳಗೆ ತಾನು ತುಂಬಿಕೊಂಡೂ ಇದೆಯಂತೆ


ವ್ಯಾಖ್ಯಾನ:

ಚೇತನವೂ ಅಚೇತನವೂ ಆಗಿರುವ ಪ್ರಪಂಚವನ್ನು ಅವ್ಯಕ್ತದೊಂದು ವಿಶೇಷವು ಆವರಿಸಿಕೊಂಡು ಅದರೊಳಗೆ ತಾನು ತುಂಬಿಕೊಂಡೂ ಇದೆಯಂತೆ. ಅದು ಭಾವಕ್ಕೂ ಒಳಪಡದಂತೆ ಮತ್ತು ಅಳತೆಗೂ ನಿಲುಕದಂತೆ. ಆ ಚೈತನ್ಯವಿಶೇಷಕ್ಕೆ ತಲೆಬಾಗು ಎಂದಿದ್ದಾರೆ.


ತಾತ್ಪರ್ಯ:

ಅವ್ಯಕ್ತವಾದುದನ್ನು ಅರಿತು ತಲೆಬಾಗಬೇಕೆಂಬುದು ಈ ಕಗ್ಗದ ತಾತ್ಪರ್ಯ.


ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ನಿಧಾನಗತಿಯ ರಾಗಾನುರಣನಗಳಲ್ಲಿ ಕಗ್ಗದ ಭಾವ ಗ್ರಾಹ್ಯವಾಗಬಲ್ಲುದು. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ.

#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻


ಕೃಷ್ಣಪ್ರಕಾಶ ಬೊಳುಂಬು

Friday, April 10, 2026

ಕಗ್ಗಮಾಲಿಕೆ - ೨: ನಂಬುಗೆ

 ಕಗ್ಗಮಾಲಿಕೆ - ೨: ನಂಬುಗೆ


ಕಗ್ಗ:

ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ |
ದೇವ ಸರ್ವೇಶ ಪರಬೊಮ್ಮನೆಂದು ಜನಂ ||
ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |
ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||


ವ್ಯಾಖ್ಯಾನ:

ಲೋಕದ ಹುಟ್ಟಿಗೆ ಕಾರಣಕರ್ತನೆಂದೂ, ಲೋಕದ ಮಾಯೆಯನ್ನು ಆಗಗೊಡುವವನೆಂದೂ, ದೇವರ ದೇವ ಪರಬ್ರಹ್ಮನೆಂದೂ, ಲಕ್ಷ್ಮೀ ಸಮೇತನಾದ ಮಹಾವಿಷ್ಣುವೆಂದೂ ಯಾವುದನ್ನು ತಾವು ಕಾಣದಿದ್ದರೂ ಜನರು ಶ್ರದ್ಧೆಯಿಂದ ನಂಬಿದ್ದಾರೋ ಆ ಪರಮಾದ್ಭುತ ಚೈತನ್ಯಕ್ಕೆ ಮೊದಲು ತಲೆಬಾಗು.


ತಾತ್ಪರ್ಯ:

ಲೋಕವನ್ನು ಸೃಷ್ಟಿಸಿದ ಚೈತನ್ಯವನ್ನು ಮೊದಲಿಗೆ ನಂಬಬೇಕು, ನಂಬಿ ತಲೆಬಾಗಬೇಕು ಎಂದು ಗುಂಡಪ್ಪನವರು ಈ ಕಗ್ಗದ ಮೂಲಕ ಸಾರಿದ್ದಾರೆ.


ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ನಿಧಾನಗತಿಯ ಅನುರಣನಗಳಲ್ಲಿ ಕಗ್ಗದ ಭಾವ ಗ್ರಾಹ್ಯವಾಗಬಲ್ಲುದು. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ.

#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻


ಕೃಷ್ಣಪ್ರಕಾಶ ಬೊಳುಂಬು

Monday, March 30, 2026

ಕಗ್ಗಮಾಲಿಕೆ - ೧: ಬುದ್ಧಿಯ ಬೆಳಗು

 ಕಗ್ಗಮಾಲಿಕೆ - ೧: ಬುದ್ಧಿಯ ಬೆಳಗು


ಬುದ್ಧಿಯ ಪ್ರಚೋದನೆಯೇ ಪರಮ ಶ್ರೇಯಸ್ಸು


ಕಗ್ಗ:

ಶ್ರೀಯನಾಯುವ ಬಲವ ಜಯವ ಬೇಡಿರ್ದೊಡಂ |

ಗಾಯತ್ರಿಯನೆ ಪರಮಮಂತ್ರವೆಂದಾರ್ಯರ್ ||

ಧೀಯಂ ಪ್ರಚೋದಿಸೆಂದನುದಿನದಿ ಬೇಡಿದರು |

ಶ್ರೇಯಸ್ಸು ಧೀಮಹಿಮೆ - ಮಂಕುತಿಮ್ಮ ||


ವ್ಯಾಖ್ಯಾನ:

"ನಮ್ಮ ಪೂರ್ವಿಕರು ಐಶ್ವರ್ಯವೂ ಆಯುಸ್ಸೂ ಬಲವೂ ಜೊತೆಗೆ ಗೆಲುವೂ ಬೇಕೆಂದು ನಿತ್ಯವೂ ಪರಮಾತ್ಮನನ್ನು ಬೇಡಿಕೊಂಡಿದ್ದರೂ ವಿಶೇಷವಾಗಿ ಬುದ್ಧಿಯನ್ನು ಪ್ರಚೋದಿಸೆಂದು ಬೇಡುವ ಗಾಯತ್ರಿ ಮಂತ್ರವನ್ನು ಪರಮಮಂತ್ರವೆಂದು ಕರೆದರು. ಶ್ರೇಯಸ್ಸೆಂಬುದು ಬುದ್ಧಿಯ ಮಹಿಮೆ. ಅದು ಬುದ್ಧಿಯ ಪರಮ ಔನ್ನತ್ಯದಲ್ಲಿ ಸಿದ್ದಿಸುವಂತಹುದು."


ತಾತ್ಪರ್ಯ:

ಶ್ರೇಯಸ್ಸೆಂಬುದು ಬುದ್ಧಿಯ ಮಹಿಮೆ. ಅದು ಬುದ್ಧಿಯ ಪರಮ ಔನ್ನತ್ಯದಲ್ಲಿ ಸಿದ್ಧಿಸುವಂತಹುದು - ಇದು ಈ ಕಗ್ಗದ ವಿಷಯವಸ್ತು. ಕನ್ನಡದ ಭಗವದ್ಗೀತೆಯೆಂದು ಮನ್ನಣೆ ಗಳಿಸಿದ; ಡಿ. ವಿ. ಗುಂಡಪ್ಪನವರ ಕಗ್ಗದ ಸಾಲುಗಳು ಇಲ್ಲಿ ಗಾಯತ್ರಿ ಮಂತ್ರದ ಸಾರ ಮತ್ತು ಲೌಕಿಕ ಜೀವನದ ನಡುವಣ ಸಮನ್ವಯವನ್ನು ತೋರಿಸಿಕೊಟ್ಟಿದೆ. 


ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ.  ನಿಧಾನಗತಿಯ ಅನುರಣನಗಳಲ್ಲಿ ಕಗ್ಗದ ಭಾವ ಗ್ರಾಹ್ಯವಾಗಬಲ್ಲುದು. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ.


#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻


ಕೃಷ್ಣಪ್ರಕಾಶ ಬೊಳುಂಬು



ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ

   ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ ಪೀಠಿಕೆ: ಚಿಟಿಕೆ ಹೊಡೆಯಲು ಎರಡು ಬೆರಳುಗಳು ಬೇಕಾಗುವಂತೆ, ಲೋಕದ ವ್ಯವಹಾರದಲ್ಲಿ ದ್ವೈತವೇ ಇರುತ್ತದೆ. ಆದರೆ ಪರಮತತ್ತ್ವ...